28/09 15:08 ಪುರಾಣವೊಂದರ ಪ್ರಕಾರ-ಬ್ರಹ್ಮನ ವರಬಲದಿಂದ ಮದೋನ್ಮತ್ತನಾಗಿದ್ದ "ಮಹಿಷಾಸುರ"ನ ಸಂಹಾರ ಮಾಡಲು, ದೇವತೆಗಳೆಲ್ಲ ತಮ್ಮ ಶರೀರದ ಒಂದೊಂದು ಅಂಶವನ್ನು ತೆಗೆ ದು ಆದಿಶಕ್ತಿಯನ್ನು ಸೃಷ್ಟಿ ಮಾಡಿ, ಮಹಿಷನ ಮೇಲೆ ಯುದ್ದಕ್ಕೆ ಕಳುಹಿಸಿ ಅವನನ್ನು ಸಂಹಾರ ಮಾಡಲು ನೆರವಾಗುತ್ತಾರೆ. ಹತ್ತು ದಿನಗಳಲ್ಲಿ ಸಪ್ತಮಾತೃಕೆಯರ ನೆರವಿನಿಂದ ಮಹಿಷ ನನ್ನು ಶಕ್ತಿ ಮತ್ತು ಯುಕ್ತಿಯಿಂದ ಕೊಲ್ಲುತ್ತಾಳೆ. ಆದುದರಿಂದಲೇ ಹತ್ತನೇಯ ದಿನ ವಿಜಯದಶಮಿಯನ್ನು ಆಚರಿಸುವುದು ರೂಢಿಯಾಗಿದೆ.ಶ್ರೀ ರಾಮನು ರಾವಣನ ಮೇಲೆ ಯುದ್ಧ ಮಾಡುವ ಮುನ್ನ ದುರ್ಗೆಯನ್ನು ಪೂಜಿಸಿ ವರ ಪಡೆದಿದ್ದನೆಂಬ ಕಥೆ ಇದೆ. ದುಷ್ಟ ಶಕ್ತಿ ರಾವಣನ ಮೇಲೆ ಶ್ರೀ ರಾಮನ ಜಯದ ಸಂಕೇತವಾಗಿ ನವರಾತ್ರಿಯನ್ನು ಆಚರಿಸುವರು.ಪಾಂಡವರು ಕೌರವರ ಮೇಲೆ ವಿಜಯ ಸಾಧಿಸಿದ ದಿನವೂ ಇದೆಂದು ಹೇಳಲಾಗುತ್ತದೆ. ಕರ್ನಾಟಕದಲ್ಲಿ ವಿಜಯನಗರ ಸಂಸ್ಥಾನದಲ್ಲಿ ದಸರಾ ಉತ್ಸವಕ್ಕೆ ಚಾಲನೆ ಸಿಕ್ಕಿದರೆ, ಮೈಸೂರು ಸಂಸ್ಥಾನದ ಒಡೆಯರ ಕಾಲದಲ್ಲಿ ಮನೆ ಮನೆಗಳಲ್ಲೂ ಪ್ರಚಲಿತವಾಯಿತು.
ಈ ಹತ್ತು ದಿನಗಳನ್ನು ಮೈಸೂರಿನಲ್ಲಿ ವಿಶೇಷ ರೀತಿಯಿಂದ ಆಚರಿಸಲಾಗುತ್ತದೆ. ಇತಿಹಾಸ ಪ್ರಸಿದ್ಧ ಮೈಸೂರಿನ ಅರಮನೆ ದೀಪಾಲಂಕಾರದಿಂದ ಕಂ ಗೊಳಿಸುತ್ತದೆ. ಮೈಸೂರನ್ನು ಆಳಿದ ರಾಜ ಮನೆತನವಾದಒಡೆಯರ ಕುಲ ದೇವತೆಯಾದ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಲಾಗುತ್ತದೆ. ವಿಜಯದಶಮಿಯಂದು ಯುದ್ಧಕ್ಕಾಗಿ ಬಳಸುವ ಎಲ್ಲಾ ಆಯುಧ, ಪರಿಕರಗಳನ್ನು ಪೂಜಿಸಿ ಮೆರವಣಿಗೆಯ ಮೂಲಕ ಅರಮನೆಯಿಂದ ಬನ್ನಿ ಮಂಟಪಕ್ಕೆ ಒಯ್ಯುವುದು ಮೈಸೂರಿನ ವಿಶೇಷತೆ. ಸಿಂಹದ ಮೇಲೆ ಕುಳಿತು ಮಹಿಷಾಸುರ ಎಂಬ ರಕ್ಕಸನನ್ನು ಕೊಂದು ಪ್ರಜೆಗಳನ್ನು ಕಾಪಾಡಿದ ಚಾಮುಂಡಿ ದೇವತೆಯನ್ನು ಪೂಜಿಸುವುದು ಮೈಸೂರಿನ ವಿಶೇಷತೆ.
